ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು | PUC Lecturers Boycott Evaluation from March 20 Karnataka 2nd PU students Result May Be Delayed

Karnataka

oi-Manohara M

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯತ್‌ಗಳಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ರಾಜ್ಯದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹೋರಾಟಕ್ಕೆ ಮುಂದಾಗಿದ್ದಾರೆ. ಇದರ ಭಾಗವಾಗಿ ಮಾರ್ಚ್ 20ರಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಭಾನುವಾರ ಶಿವಮೊಗ್ಗದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರವು ಶಿಕ್ಷಣ ತಜ್ಞರು ಅಥವಾ ಉಪನ್ಯಾಸಕರ ಸಂಘಟನೆಗಳ ಜೊತೆ ಚರ್ಚಿಸದೆ ಏಕಪಕ್ಷೀಯವಾಗಿ ಪಿಯು ಶಿಕ್ಷಣದ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಸಿಬ್ಬಂದಿಗೆ ವರ್ಗಾಯಿಸುವ ನಿರ್ಧಾರ ಮಾಡಿದೆ. ಇದು ಪದವಿಪೂರ್ವ ಶಿಕ್ಷಣದ ಅಸ್ತಿತ್ವಕ್ಕೆ ಮಾರಕವಾಗಲಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈ ಹೋರಾಟ ಅನಿವಾರ್ಯವಾಗಿದೆ” ಎಂದು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಹೇಳಿದ್ದಾರೆ.

PUC Lecturers Boycott Evaluation

ಸಂಘದ ಪ್ರಮುಖ ಬೇಡಿಕೆಗಳು

ಉಪನ್ಯಾಸಕರ ಸಂಘವು ಸರ್ಕಾರದ ಮುಂದೆ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಮೊದಲಿನಂತೆ ಅದೇ ಇಲಾಖೆಯ ನಿರ್ದೇಶನಾಲಯಕ್ಕೆ ನೀಡಬೇಕು. ಅನುಪಾತ ಮರುನಿಗದಿ ಮಾಡುವುದು. ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿ ಮತ್ತು ಉಪನ್ಯಾಸಕರ ಅನುಪಾತವನ್ನು ಎನ್‌ಸಿಇಆರ್‌ಟಿ (NCERT) ಮಾರ್ಗಸೂಚಿಯಂತೆ ಮರುನಿಗದಿಪಡಿಸಬೇಕು. ಕಳೆದ ಮೂರು ವರ್ಷಗಳಿಂದ ಪರಿಷ್ಕರಣೆಯಾಗದ ಮೌಲ್ಯಮಾಪನ ಭತ್ಯೆ ಮತ್ತು ಸಂಭಾವನೆಯನ್ನು ಹೆಚ್ಚಿಸಬೇಕು ಹಾಗೂ ಬಾಕಿ ಇರುವ ಪಾವತಿಗಳನ್ನು ಕೂಡಲೇ ಬಿಡುಗಡೆ ಮಾಡಬೇಕು.

ಅನುದಾನಿತ ಕಾಲೇಜುಗಳ ರಕ್ಷಣೆ ಮಾಡುವುದು. ಕಾರ್ಯಭಾರದ ಕೊರತೆ ಇರುವ ಅನುದಾನಿತ ಪಿಯು ಕಾಲೇಜುಗಳ ಉಪನ್ಯಾಸಕರನ್ನು ಸೇವೆಯಿಂದ ಮುಕ್ತಗೊಳಿಸುವ ಆದೇಶವನ್ನು ಹಿಂಪಡೆದು, ಅವರನ್ನು ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜಿಸಬೇಕು ಎಂಬ ಬೇಡಿಕೆಗಳನ್ನು ಸಂಘ ಸರ್ಕಾರದ ಮುಂದಿಟ್ಟಿದೆ. ಮಾರ್ಚ್ 20ರಿಂದ ರಾಜ್ಯದ ಎಂಟು ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯ ಆರಂಭವಾಗಬೇಕಿದ್ದು, ಉಪನ್ಯಾಸಕರ ಈ ನಿರ್ಧಾರದಿಂದಾಗಿ ಫಲಿತಾಂಶ ಪ್ರಕಟಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಸರ್ಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸಂಘ ಒತ್ತಾಯಿಸಿದೆ.

ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು

ಒಂದು ವೇಳೆ ಉಪನ್ಯಾಸಕರು ಹೋರಾಟ ನಡೆಸಿದರೆ, ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ. ಪಿಯು ಫಲಿತಾಂಶ ವಿಳಂಬವಾಗಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೂ ಪೆಟ್ಟು ನೀಡಲಿದೆ. ಪಿಯುಸಿ ನಂತರ ಸಿಇಟಿ (CET), ನೀಟ್ (NEET) ಮತ್ತು ಕಾಮೆಡ್-ಕೆ (COMED-K) ನಂತಹ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳು ಸಾಲಾಗಿ ಬರುತ್ತವೆ. ಮೌಲ್ಯಮಾಪನ ವಿಳಂಬವಾದರೆ ಫಲಿತಾಂಶ ಪ್ರಕಟಣೆಯೂ ತಡವಾಗುತ್ತದೆ. ಇದರಿಂದಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ಮತ್ತು ಕೌನ್ಸೆಲಿಂಗ್ ಅವಧಿಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆಯಿದೆ. ಈಗಾಗಲೇ ಪರೀಕ್ಷೆಯ ಒತ್ತಡ ಮುಗಿಸಿ ನಿರಾಳವಾಗಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರು, ಈಗ ಮೌಲ್ಯಮಾಪನ ಬಹಿಷ್ಕಾರದ ಸುದ್ದಿಯಿಂದಾಗಿ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಲಕ್ಷಾಂತರ ಪಿಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರವು ಕೂಡಲೇ ಉಪನ್ಯಾಸಕರ ಸಂಘದೊಂದಿಗೆ ಮಾತುಕತೆ ನಡೆಸಿ ಈ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಒಂದು ವೇಳೆ ಮಾರ್ಚ್ 20ರ ಒಳಗೆ ಯಾವುದೇ ಒಮ್ಮತದ ತೀರ್ಮಾನಕ್ಕೆ ಬರದಿದ್ದರೆ, ಮೌಲ್ಯಮಾಪನ ಕಾರ್ಯ ಸ್ಥಗಿತಗೊಂಡು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ವ್ಯತ್ಯಯ ಉಂಟಾಗುವುದು ಖಚಿತ. ಸದ್ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಮೌಲ್ಯಮಾಪನ ವಿಳಂಬವಾಗುವ ಆತಂಕದಲ್ಲಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/puc-lecturers-boycott-evaluation-from-march-20-karnataka-2nd-pu-students-result-may-be-delayed-447229.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo