ಮಧುರೈ ಏಕೆ? ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ಏರ್‌ಪೋರ್ಟಾಗಿ ಘೋಷಿಸಿ | Why Only Madurai? Declare Hubballi and Belagavi as International Airports: MB Patil Slams Centre

Karnataka

oi-Shankrappa Parangi

ಬೆಂಗಳೂರು: ತಮಿಳುನಾಡಿನ ಚುನಾವಣೆ 2026 ಇದೇ ವರ್ಷ ನಡೆಯಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳನ್ನು ಸಮಾನವಾಗಿ ಕಾಣದೇ ಚುನಾವಣೆ ದೃಷ್ಟಿಯಿಂದ ತಮಿಳುನಾಡಿಗೆ ಹೆಚ್ಚಿನ ಆದ್ಯತೆ ಕೊಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Bengaluru Second International Airport) ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ಮಧ್ಯೆ ಪೈಪೋಟಿ ಉಂಟಾಗಿತ್ತು. ಇದೀಗ ಕೇಂದ್ರದ ನಿರ್ಧಾರದಿಂದ ದೇಶಿಯ ವಿಮಾನ ನಿಲ್ದಾಣ ವಿಚಾರವಾಗಿ ಕರ್ನಾಟಕಕ್ಕೆ ಹಿನ್ನಡೆ ಆಗಿದೆ.

ಹೌದು, ಕೇಂದ್ರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿದೆ. ಅದಕ್ಕೆ ತಕ್ಕ ಸೌಕರ್ಯವನ್ನು ಒದಗಿಸಲು ಮುಂದಾಗಿದೆ. ಆದರೆ ಉತ್ತರ ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ ನಿಲ್ದಾಣಗಳಿಗೆ ಅಂತಾರಾಷ್ಟ್ರೀಯ ನಿಲ್ದಾಣ ಘೋಷಣೆ ಮಾಡಿಲ್ಲ. ‘ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ’ ಎಂಬ ನಿಲುವು ಕೇಂದ್ರ ತಾಳಿದೆ ಎಂದು ರಾಜ್ಯ ಮೂಲಸೌಕರ್ಯ ಹಾಗೂ ಕೈಗಾರಿಕೆ ಸಚಿವ ಎಂಬಿ ಪಾಟೀಲ ಬುಧವಾರ ದೂರಿದ್ದಾರೆ.

Why Only Madurai

ಈ ತಾರತಮ್ಯ ಧೋರಣೆ ಏಕೆ?

ಕೇಂದ್ರದಿಂದ ಸದರಿ ನಿರ್ಧಾರ ಹೊರ ಬರುತ್ತಿದ್ದಂತೆ ಆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿದ್ದು, ಆ ಭಾಗ್ಯ ಕರ್ನಾಟಕಕ್ಕೆ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಪ್ರದರ್ಶಿಸುತ್ತಿದೆ ಎಂದು ಅವರು ಕಿಡಿ ಕಾರಿದರು.

ಕೇಂದ್ರ ಸರ್ಕಾರದ ಉದ್ದೇಶ ಸ್ಪಷ್ಟವಾಗಿದೆ. ಇನ್ನೇನು ಇದೇ ವರ್ಷ ತಮಿಳುನಾಡು ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು ಬಿಜೆಪಿ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ಆದರೆ ಕರ್ನಾಟಕ ರಾಜ್ಯದ ಬೇಡಿಕೆ ಬಗ್ಗೆ ಅದು ಉದಾಸೀನ ಮನೋಭಾವ ಪ್ರದರ್ಶಿಸಿರುವುದು ಪ್ರಶ್ನಾರ್ಹವಾಗಿದೆ ಎಂದು ಕೇಂದ್ರದ ನಿರ್ಧಾರವನ್ನು ಕಟುವಾಗಿ ಟೀಕಿಸಿದ್ದಾರೆ.

ಹುಬ್ಬಳ್ಳಿ -ಬೆಳಗಾವಿ ಏರ್‌ಪೋರ್ಟ್: ಸಂಸದರು ರಾಜ್ಯದ ಪರ ನಿಲ್ಲಲಿ

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಬೇಕು. ಇದರಿಂದ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲ ಆಗುತ್ತದೆ ಎಂದು ಕಳೆದ ವರ್ಷ (2025ರ ಜೂನ್ 24ರಂದು) ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆಯಲಾಗಿತ್ತು. ಈಗ ನೋಡಿದರೆ ಹೀಗಾಗಿದೆ. ಧಾರವಾಡ ಸಂಸದರಾಗಿ ಕೇಂದ್ರ ಸಂಪುಟದಲ್ಲಿರುವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಈಗ ನಿರ್ದಿಷ್ಟವಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣ ಎರಡರ ಪೈಕಿ ಒಂದನ್ನಾದರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸಬೇಕು. ಎರಡನ್ನೂ ಉನ್ನತೀಕರಿಸಿದರೆ ಅದು ಇನ್ನೂ ಸ್ವಾಗತಾರ್ಹ. ರಾಜ್ಯದ ಅಗತ್ಯವನ್ನು ಕೇಂದ್ರ ಮನಗಾಣಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಏರ್‌ಪೋರ್ಟ್‌: ಎರಡು ರಾಜ್ಯಗಳ ಪೈಪೋಟಿ

ಬೆಂಗಳೂರು ವ್ಯಾಪ್ತಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಯೋಜನೆ ಅನುಷ್ಠಾನ ವಿಚಾರವಾಗಿ ತಮಿಳುನಾಡು ಕರ್ನಾಟಕಕ್ಕೆ ಪೈಪೋಟಿ ನೀಡಿತ್ತು. ಕೇಂದ್ರದಿಂದ ಒಪ್ಪಿಗೆ ಪಡೆಯುವಲ್ಲಿ ಚುರುಕುತನ ಪ್ರದರ್ಶಿಸಿತ್ತು. ಸದ್ಯ ಈ ಯೋಜನೆಗೆ ಪ್ರಸ್ತಾವನೆಗೆ ಹಿನ್ನಡೆ ಆಗಿದೆ. ಆದರೆ ಎರಡು ಸರ್ಕಾರಗಳು ಯೋಜನೆಗಳಿಂದ ಹಿಂದೆ ಸರಿದಿಲ್ಲ ಎಂಬುದನ್ನು ಗಮನಿಸಬೇಕಿದೆ.


Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/why-only-madurai-declare-hubballi-and-belagavi-as-international-airports-mb-patil-slams-centre-446741.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo