
Karnataka
oi-Manohara M
ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆ ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಮಾರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ದುಷ್ಕೃತ್ಯ ಎಸಗಿದವರಿಗೆ ಕಾನೂನಿನ ಮೂಲಕ ತಕ್ಕ ಶಿಕ್ಷೆ ನೀಡುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತವಾಗಿದ್ದು, ಯಾವುದೇ ರೀತಿಯ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ನಾಡಿನ ಜನತೆಗೆ ಭಯಮುಕ್ತ ಮತ್ತು ನೆಮ್ಮದಿಯ ಬದುಕು ನೀಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಹೇಳಿದ ಅವರು, ಶಾಂತಿ-ಸೌಹಾರ್ದತೆಗೆ ಭಂಗ ತರುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ, ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದ ಸಿಎಂ, ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಘಟನೆಯ ಹಿನ್ನೆಲೆ
ಬಾಗಲಕೋಟೆ ನಗರದಲ್ಲಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದೆ. ಬುಧವಾರ ಸಂಜೆ ಸಂಭವಿಸಿದ ಈ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ 8 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರಕರಣದ ಕುರಿತು ವಿವರ ನೀಡಿದ್ದು, ರಾತ್ರಿ ಸುಮಾರು 10:06ರ ಸುಮಾರಿಗೆ ಕಲ್ಲು ತೂರಾಟ ನಡೆದಿರುವುದಾಗಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಸುಮೋಟೋ ಕೇಸ್ ದಾಖಲಿಸಿಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ 8 ಮಂದಿಯನ್ನು ಬಂಧಿಸಲಾಗಿದೆ. ಇವರಲ್ಲಿ ತನ್ವೀರ್ ಎಂಬಾತ ಕಲ್ಲು ತೂರಾಟ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ತನ್ವೀರ್ ಹೊರತುಪಡಿಸಿ ಬೇರೆ ಯಾರೂ ಕಲ್ಲು ತೂರಾಟ ಮಾಡಿಲ್ಲ ಎಂದು ಆತನೇ ಹೇಳಿದ್ದಾನೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಈ ಗಲಾಟೆ ಪೂರ್ವಯೋಜಿತವಾಗಿರಲಿಲ್ಲ ಹಾಗೂ ಡಿಜೆ ವಿಚಾರದಿಂದ ಕಲ್ಲು ತೂರಾಟ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ.
ಈಗಾಗಲೇ…
— Siddaramaiah (@siddaramaiah) February 20, 2026
ಘಟನೆಯಲ್ಲಿ ಕಾನ್ಸ್ಟೇಬಲ್ಗಳಿಗೆ ಗಾಯಗಳಾಗಿದ್ದು, ಕಲ್ಲುಗಳ ಜೊತೆಗೆ ಚಪ್ಪಲಿಯನ್ನೂ ಎಸೆಯಲಾಗಿದೆ. ಮಸೀದಿಯೊಳಗೆ ಬಳಸಲಾಗಿದ್ದ ಕಲ್ಲುಗಳನ್ನು ತೆಗೆದುಕೊಂಡು ತೂರಾಟ ನಡೆಸಲಾಗಿದೆ. ಮಸೀದಿಯೊಳಗೆ ಯಾವುದೇ ರಾಡ್ ಅಥವಾ ಬೇರೆ ಮಾರಕಾಸ್ತ್ರಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಿಎನ್ಎಸ್ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿರುವುದಾಗಿ ತಿಳಿಸಿದ್ದಾರೆ.
ನಿಷೇಧಾಜ್ಞೆ ನಡುವೆಯೂ ಕಲ್ಲುತೂರಾಟ, ಲಾಠಿಚಾರ್ಜ್
ಬಾಗಲಕೋಟೆ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕಿಲ್ಲಾ ಓಣಿ ಪ್ರದೇಶದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಖಂಡಿಸಿ ಕೊತ್ತಲೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಭೆ ಸೇರಿದ್ದರು. ಕೇವಲ 8 ಮಂದಿಯನ್ನಷ್ಟೇ ಬಂಧಿಸುವುದು ಸಾಕಾಗುವುದಿಲ್ಲ, ಘಟನೆಯಲ್ಲಿ ಭಾಗಿಯಾಗಿದ್ದ ಎಲ್ಲರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಪೊಲೀಸರು ಸಭೆಯ ಸ್ಥಳದಲ್ಲಿ ಭದ್ರತೆಗಾಗಿ ಕಾರ್ಯಕರ್ತರನ್ನು ತಡೆಯಲು ಮುಂದಾದರು. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು “ಎಲ್ಲ ಆರೋಪಿಗಳನ್ನೂ ಬಂಧಿಸದಿದ್ದರೆ, ನಗರದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪೊಲೀಸರೊಂದಿಗೆ ವಾಗ್ವಾದ ನಡೆಯುತ್ತಿರುವ ಸಂದರ್ಭದಲ್ಲೇ ಕೆಲ ಉದ್ರಿಕ್ತರು ಸಮೀಪದ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ತಿಳಿದುಬಂದಿದೆ. ಮೀನು ಮಾರುಕಟ್ಟೆ ಹಾಗೂ ತರಕಾರಿ ಮಾರುಕಟ್ಟೆಯಲ್ಲಿರುವ ಕೆಲವು ಅಂಗಡಿಗಳ ಮೇಲೂ ಕಲ್ಲು ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸಿದರು. ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಉದ್ವಿಗ್ನತೆಯನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/bagalkot-stone-pelting-cm-siddaramaiah-urges-public-to-maintain-peace-after-shivaji-jayanti-incident-444445.html. xn--babytilbehr-pgb.com does not claim ownership of this content. All rights remain with the original publisher.

