
Karnataka
oi-Manohara M
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ನಂತರ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಅಭ್ಯರ್ಥಿ ಪರವಾಗಿ ಮತಯಾಚಿಸಿ ವಿರೋಧ ಪಕ್ಷಗಳಿಗೆ ಖಡಕ್ ಸಂದೇಶ ರವಾನಿಸಿದರು.
ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಇಂದು ಕ್ರಾಂತಿಯೋಗಿ ಬಸವಣ್ಣನವರ ನಾಡಿನಲ್ಲಿದ್ದೇವೆ. ಬಸವಣ್ಣನವರ ತತ್ವದಂತೆ ನಾವು ನುಡಿದಂತೆ ನಡೆದಿದ್ದೇವೆ. ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಎಲ್ಲ ವರ್ಗದ ಜನರಿಗೂ ಅನುಕೂಲ ಮಾಡಿಕೊಟ್ಟಿದ್ದೇವೆ” ಎಂದು ಸರ್ಕಾರದ ಸಾಧನೆಗಳನ್ನು ಮುಂದಿಟ್ಟರು.

ಅಭ್ಯರ್ಥಿ ಉಮೇಶ್ ಮೇಟಿಗೆ ಸರ್ಕಾರದ ಅಭಯ
ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಉಮೇಶ್ ಮೇಟಿ ಅವರ ಗೆಲುವು ಅನಿವಾರ್ಯ ಎಂದ ಡಿಸಿಎಂ, “ಇಡೀ ರಾಜ್ಯ ಸರ್ಕಾರ ಉಮೇಶ್ ಮೇಟಿ ಅವರ ಜೊತೆಗಿದೆ. ಈ ಉಪಚುನಾವಣೆಯಲ್ಲಿ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಅಭೂತಪೂರ್ವವಾಗಿ ಗೆಲ್ಲಿಸಬೇಕು. ಆ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಜನರು ಸಹಕರಿಸಬೇಕು” ಎಂದು ಮತದಾರರಲ್ಲಿ ಮನವಿ ಮಾಡಿದರು.
ನಾಮಪತ್ರ ಸಲ್ಲಿಕೆ ಹಾಗೂ ಬಹಿರಂಗ ಸಭೆಯ ಸಂದರ್ಭದಲ್ಲಿ ಕಾಂಗ್ರೆಸ್ನ ಘಟಾನುಘಟಿ ನಾಯಕರು ಭಾಗವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲೆಯ ಶಾಸಕರು ಮತ್ತು ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ‘ಕೈ’ ನಾಯಕರ ಮಾತಿಗೆ ಹರ್ಷೋದ್ಗಾರ ವ್ಯಕ್ತಪಡಿಸಿದರು.
ಗ್ಯಾರಂಟಿ ಅಲೆ ಮತ್ತು ಅಭಿವೃದ್ಧಿ ಮಂತ್ರ
ಬಾಗಲಕೋಟೆಯಲ್ಲಿ ಈ ಬಾರಿ ಗ್ಯಾರಂಟಿ ಯೋಜನೆಗಳ ಪ್ರಭಾವ ದಟ್ಟವಾಗಿದೆ. ಇದರ ಜೊತೆಗೆ ಪ್ರಭಾವಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲರ ಬೆಂಬಲ ಉಮೇಶ್ ಮೇಟಿ ಅವರಿಗೆ ಹೆಚ್ಚಿನ ಬಲ ತಂದಿದೆ. ಬಸವಣ್ಣನ ನಾಡಿನಲ್ಲಿ ಕಾಂಗ್ರೆಸ್ ತನ್ನ ವಿಜಯ ಪತಾಕೆ ಹಾರಿಸುವ ಎಲ್ಲ ಲಕ್ಷಣಗಳು ಕಾಣಿಸುತ್ತಿವೆ ಎಂಬ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ: ಸಿದ್ದರಾಮಯ್ಯ
ರಾಜ್ಯದ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದ್ದು, ಬಾಗಲಕೋಟೆ ಮತ್ತು ದಾವಣಗೆರೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅವರ ಜೊತೆಗಿದ್ದ ಸಿಎಂ ಸಿದ್ದರಾಮಯ್ಯ, ಅಭ್ಯರ್ಥಿಗೆ ಶುಭ ಹಾರೈಸಿ ಗೆಲುವಿನ ಮಂತ್ರ ಬೋಧಿಸಿದರು. ಬಳಿಕ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ, ಕ್ಷೇತ್ರದ ಮತದಾರರು ಉಮೇಶ್ ಮೇಟಿ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
“ಬಿಜೆಪಿ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ”
ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, “ಬಿಜೆಪಿ ಯಾವುದೇ ಕಾರಣಕ್ಕೂ ಈ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ರಾಜ್ಯದ ಜನತೆ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಸತ್ಯ” ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಾಗಲಕೋಟೆ ಭಾಗದ ನೀರಾವರಿ ಯೋಜನೆಗಳು ಮತ್ತು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಸರ್ಕಾರ ಯಾವಾಗಲೂ ಬಡವರ ಮತ್ತು ರೈತರ ಪರವಾಗಿದೆ. ಉಮೇಶ್ ಮೇಟಿ ಅವರ ಗೆಲುವು ಬಾಗಲಕೋಟೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ ಎಂದರು.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/umesh-meti-entire-government-supports-congress-candidate-dk-shivakumar-at-bagalkot-nomination-rally-448095.html. xn--babytilbehr-pgb.com does not claim ownership of this content. All rights remain with the original publisher.
