
Karnataka
oi-Pragathi S
ರಾಜ್ಯದಲ್ಲಿ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದ್ದು, ಯಾವುದೇ ಕ್ಷಣದಲ್ಲೂ ಕುಸಿಯುವ ಭೀತಿಯಲ್ಲಿವೆ. ಈ ಗಂಭೀರ ವಿಚಾರದ ಬಗ್ಗೆ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಶಾಲೆಗಳ ದುಸ್ಥಿತಿಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರೆ.
“ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಕಟ್ಟಡಗಳು ಕುಸಿಯುವ ಹಂತದಲ್ಲಿವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ರ ಮೈಸೂರಿನಲ್ಲಿ ಮೈಲಾರಿ ದೋಸೆ, ಬೆಣ್ಣೆ ದೋಸೆ ಸವಿಯುತ್ತಾ ಮಜಾ ಮಾಡುತ್ತಿದ್ದಾರೆ. ಸಿಎಂ ಅವರಿಗೆ ಬಡ ಮಕ್ಕಳ ಶಿಕ್ಷಣ ಹಾಗೂ ಭದ್ರತೆಗಿಂತ ದೋಸೆ ಸವಿಯುವುದೇ ಮುಖ್ಯವಾಯಿತೇ?” ಎಂದು ಆರ್. ಅಶೋಕ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಮುಂದುವರಿದು ಮುಖ್ಯಮಂತ್ರಿಗಳನ್ನು ನೇರವಾಗಿ ಪ್ರಶ್ನಿಸಿರುವ ಅವರು, “ಸಿಎಂ ಸಿದ್ದರಾಮಯ್ಯನವರೇ, ಮಕ್ಕಳು ಶಿಕ್ಷಣ ಕಲಿಯಲು ಶಾಲೆಗೆ ಬರಬೇಕೇ ಅಥವಾ ಕುಸಿಯುವ ಹಂತದಲ್ಲಿರುವ ಕಟ್ಟಡಗಳಿಗೆ ಬಲಿಯಾಗಲು ಶಾಲೆಗೆ ಬರಬೇಕೇ? ಒಂದು ವೇಳೆ ನಿಮ್ಮದೇ ಕುಟುಂಬದ ಮಕ್ಕಳು ಇಂತಹ ಅಪಾಯಕಾರಿ ಶಾಲೆಗಳಲ್ಲಿ ಓದುತ್ತಿದ್ದರೆ ನೀವು ಸುಮ್ಮನೆ ಇರುತ್ತಿದ್ದಿರಾ? ಸರ್ಕಾರಿ ಶಾಲೆಗಳ ಬಗ್ಗೆ, ಬಡವರ ಮಕ್ಕಳ ಭವಿಷ್ಯದ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯವೇಕೆ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಶಿಥಿಲಾವಸ್ಥೆ ತಲುಪಿವೆ, ಕಟ್ಟಡಗಳು ಕುಸಿಯುವ ಸ್ಥಿತಿಯಲ್ಲಿವೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತ್ರ ಮೈಲಾರಿ ದೋಸೆ, ಬೆಣ್ಣೆ ದೋಸೆ ಸವಿಯುತ್ತಾ ಮಜಾ ಮಾಡುತ್ತಿದ್ದಾರೆ.
ಸಿಎಂ @siddaramaiah ನವರೇ, ಮಕ್ಕಳು ಶಿಕ್ಷಣ ಕಲಿಯಲು ಶಾಲೆಗೆ ಬರಬೇಕೇ ಅಥವಾ ಕುಸಿಯುವ ಹಂತದಲ್ಲಿರುವ… pic.twitter.com/Trksf5iSZP
— R. Ashoka (@RAshokaBJP) April 7, 2026
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅತ್ಯಂತ ಕಳಪೆಯಾಗಿದೆ. ಮಳೆಗಾಲದಲ್ಲಿ ಸೋರುವ ಛಾವಣಿಗಳು, ಬಿರುಕು ಬಿಟ್ಟ ಗೋಡೆಗಳು ವಿದ್ಯಾರ್ಥಿಗಳಲ್ಲಿ ಮತ್ತು ಪೋಷಕರಲ್ಲಿ ಆತಂಕ ಮೂಡಿಸಿವೆ. ಸಾವಿರಾರು ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಗುಣಮಟ್ಟದ ಶಿಕ್ಷಣ ನೀಡಬೇಕಾದ ಸರ್ಕಾರಿ ಶಾಲೆಗಳು ಇದೀಗ ಅಪಾಯದ ತಾಣಗಳಾಗಿ ಮಾರ್ಪಡುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ.
ಈ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಳ್ಳಬೇಕಿದೆ. ಶಿಥಿಲಗೊಂಡಿರುವ ಕಟ್ಟಡಗಳನ್ನು ಗುರುತಿಸಿ, ಆದ್ಯತೆಯ ಮೇರೆಗೆ ದುರಸ್ತಿ ಕಾರ್ಯ ಅಥವಾ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕಾಗಿದೆ. ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಿರುವ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಕೇವಲ ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಸೀಮಿತವಾಗದೆ, ಮಕ್ಕಳ ಭವಿಷ್ಯ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಸರ್ಕಾರ ತ್ವರಿತವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/3000-govt-schools-in-karnataka-in-ruins-r-ashoka-slams-cm-siddaramaiah-for-negligence-over-education-449699.html. xn--babytilbehr-pgb.com does not claim ownership of this content. All rights remain with the original publisher.
