Odisha Hospital Fire Accident: ಒಡಿಶಾ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಹತ್ತು ರೋಗಿಗಳು ಸಾವು | Odisha SCB Medical College and Hospital ICU Fire 10 Patients Killed in Major Blaze in Cuttack

India

oi-Manohara M

ಒಡಿಶಾದ ಕಟಕ್‌ನಲ್ಲಿರುವ ಪ್ರಖ್ಯಾತ ಎಸ್‌ಸಿಬಿ (SCB) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯು (ICU) ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ರೋಗಿಗಳು ಮೃತಪಟ್ಟಿದ್ದಾರೆ. ಬೆಳಗಿನ ಜಾವ ಸುಮಾರು 3 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಮೃತರ ಸಂಖ್ಯೆಯನ್ನು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಖಚಿತಪಡಿಸಿದ್ದಾರೆ. ಗಾಯಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ಮುಖ್ಯಮಂತ್ರಿಗಳ ಮಾಹಿತಿಯ ಪ್ರಕಾರ ಬೆಂಕಿ ಕಾಣಿಸಿಕೊಂಡ ತಕ್ಷಣ ಐಸಿಯು ಒಳಗೆ ಏಳು ರೋಗಿಗಳು ಉಸಿರುಗಟ್ಟಿ ಹಾಗೂ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಉಳಿದ ಮೂವರು ರೋಗಿಗಳನ್ನು ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಬೇರೆ ವಾರ್ಡ್‌ಗಳಿಗೆ ಸ್ಥಳಾಂತರಿಸುವಾಗ ಮೃತಪಟ್ಟಿದ್ದಾರೆ. ಟ್ರಾಮಾ ಕೇರ್ ಐಸಿಯುನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ಈ ಅನಾಹುತಕ್ಕೆ ಪ್ರಾಥಮಿಕ ಕಾರಣವೆಂದು ಶಂಕಿಸಲಾಗಿದೆ.

Odisha SCB Medical College

ಘಟನೆ ಸಂಭವಿಸಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಆಸ್ಪತ್ರೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹಲವು ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಮಂತ್ರಿಗಳು ಖುದ್ದಾಗಿ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ದುರಂತದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಮೃತರಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ನ್ಯಾಯಾಂಗ ತನಿಖೆಗೆ ಆದೇಶ

ಕಟಕ್‌ನ ಎಸ್‌ಸಿಬಿ (SCB) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದ ಕುರಿತು ಓಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ರೋಗಿಗಳ ಸ್ಥಿತಿಗತಿ ಪರಿಶೀಲಿಸಿದ ನಂತರ ಅವರು ಈ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಸಮಯದಲ್ಲಿ ಟ್ರಾಮಾ ಐಸಿಯು ಮತ್ತು ಅದರ ಪಕ್ಕದ ವಾರ್ಡ್‌ಗಳಲ್ಲಿ ಒಟ್ಟು 23 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಏಳು ರೋಗಿಗಳು ಐಸಿಯುನಲ್ಲೇ ಮೃತಪಟ್ಟರೆ, ಸ್ಥಳಾಂತರದ ವೇಳೆ ಮತ್ತೂ ಮೂವರು ಸಾವನ್ನಪ್ಪಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ತಮ್ಮ ಪ್ರಾಣದ ಹಂಗು ತೊರೆದು ರೋಗಿಗಳನ್ನು ರಕ್ಷಿಸಿದ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಮತ್ತು ವೈದ್ಯಕೀಯ ತಂಡದ ಕಾರ್ಯವನ್ನು ಶ್ಲಾಘಿಸಿದ ಅವರು, ರಕ್ಷಣಾ ಕಾರ್ಯಾಚರಣೆಯ ವೇಳೆ ಗಾಯಗೊಂಡಿರುವ 11 ಸಿಬ್ಬಂದಿಗೂ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಘಟನೆಯ ಬಗ್ಗೆ ಸಮಗ್ರ ನ್ಯಾಯಾಂಗ ತನಿಖೆ ನಡೆಸಲಾಗುವುದು ಮತ್ತು ಲೋಪವೆಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಧನವನ್ನು ಘೋಷಿಸಲಾಗಿದೆ. ಪ್ರಸ್ತುತ ಉಳಿದ ರೋಗಿಗಳನ್ನು ಮತ್ತೊಂದು ಐಸಿಯುಗೆ ಸ್ಥಳಾಂತರಿಸಲಾಗಿದ್ದು, ತಜ್ಞ ವೈದ್ಯರ ತಂಡ ಅವರ ಮೇಲೆ ನಿಗಾ ಇಟ್ಟಿದೆ. ಆಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತೆಯನ್ನು ಸುಧಾರಿಸಲು ಈ ವರ್ಷದ ಬಜೆಟ್‌ನಲ್ಲಿ ₹420 ಕೋಟಿ ಹಾಗೂ ಮುಂದಿನ ವರ್ಷಕ್ಕೆ ₹400 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.


Disclaimer: This content was automatically imported from a third-party source via RSS feed. The original source is: https://kannada.oneindia.com/news/india/odisha-scb-medical-college-and-hospital-icu-fire-10-patients-killed-in-major-blaze-in-cuttack-447225.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo